ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದ ಹಿನ್ನೆಲೆಯಲ್ಲಿ ಪಿರಿಯಾಪಟ್ಟಣದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ

ಪಿರಿಯಾಪಟ್ಟಣ(ರವಿಚಂದ್ರಬೂದಿತಿಟ್ಟು): ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ, ಇಲ್ಲಿನ ಹಿರಿಯ ಕಾಂಗ್ರೆಸ್ ಮುಖಂಡರಾದ ಆರ್. ಎ ವಿಜಯೇಂದ್ರ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟ್ಟಣದ ಸಿಹಿ ಹಂಚಿ ಅತ್ಯಂತ ಸಡಗರದಿಂದ ಸಂಭ್ರಮಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಕಾಂಗ್ರೆಸ್ ಮುಖಂಡ ಆರ್.ಎ .ವಿಜಯೇಂದ್ರ ಅವರು ಡಿ.ಕೆ. ಶಿವಕುಮಾರ್ ಅವರು ಪಕ್ಷಕ್ಕಾಗಿ ಹಾಗೂ ರಾಜ್ಯದ ಜನರಿಗಾಗಿ ಹಗಲಿರುಳು ಶ್ರಮಿಸಿದ ಧೀಮಂತ ನಾಯಕರು. ಸಂಘಟನಾ ಚತುರರಾದ ಅವರು ಮುಖ್ಯಮಂತ್ರಿ ಹುದ್ದೆಗೇರಿರುವುದು ಇಡೀ ರಾಜ್ಯದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ಮೂಡಿಸಿದೆ. ಅವರ ಸಮರ್ಥ ನಾಯಕತ್ವದಲ್ಲಿ ರಾಜ್ಯವು ಪ್ರಗತಿಯ ಪಥದಲ್ಲಿ ಮತ್ತಷ್ಟು ವೇಗವಾಗಿ ಮುನ್ನಡೆಯಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಮುಂದುವರಿದು ಮಾತನಾಡಿದ ಅವರು, ಬಡವರು, ರೈತರು ಹಾಗೂ ಶೋಷಿತ ವರ್ಗಗಳ ಏಳಿಗೆಗಾಗಿ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳು ಇನ್ಮುಂದೆ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಟಿಯ ನೇತೃತ್ವದಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಜನರನ್ನು ತಲುಪಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ರಾಮಚಂದ್ರ, ಹರೀಶ್ ಹುಣಸವಾಡಿ, ಕೆಂಪಣ್ಣ, ಹರೀಶ್ ಎಂ ಕೆ, ಪರಮೇಶ್, ಶ್ರೀನಿವಾಸ್, ರಾಜೇಶ್ ಮತ್ತು ಅಭಿಮಾನಿಗಳು ಉಪಸ್ಥಿತರಿದ್ದರು.







