LatestMysore

ಮಹಿಳೆಯರು ತಂದೆ, ಪತಿ, ಮಕ್ಕಳ ಮೇಲೆ ಅವಲಂಬಿತರಾಗದೆ ಸ್ವಂತ ಜೀವನ ರೂಪಿಸಿಳ್ಳಬೇಕು: ಡಾ. ಹೆಚ್.ಪಿ. ಶೋಭಾ

ಮೈಸೂರು: ಮಹಿಳೆಯರು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸ್ವಾವಲಂಬಿಗಳಾಗಬೇಕು. ತಂದೆ, ಪತಿ ಅಥವಾ ಮಕ್ಕಳ ಮೇಲೆಯೇ ಅವಲಂಬಿತರಾಗದೆ ತಮ್ಮ ಸ್ವಂತ ಸಾಮರ್ಥ್ಯದ ಮೇಲೆ ಜೀವನ ರೂಪಿಸಿಕೊಳ್ಳಬೇಕು ಎಂದು ಕೆ.ಆರ್. ಆಸ್ಪತ್ರೆಯ ಅಧೀಕ್ಷಕಿ ಹಾಗೂ ಮೂಳೆ ತಜ್ಞೆ ಡಾ. ಹೆಚ್.ಪಿ. ಶೋಭಾ ಹೇಳಿದರು.

ಮೈಸೂರು ನಗರದ ಕೃಷ್ಣಮೂರ್ತಿಪುರಂನ ನಮನ ಕಲಾ ಮಂಟಪದಲ್ಲಿ ಸಮರ್ಥನಂ ಅಂಗವಿಕಲರ ಸಂಸ್ಥೆಯ ಜೀವನ ಕೌಶಲ್ಯ ತರಬೇತಿ ಕೇಂದ್ರದ 2026–27ನೇ ಸಾಲಿನ ದ್ವಿತೀಯ ಬ್ಯಾಚ್ ವಿದ್ಯಾರ್ಥಿಗಳಿಗೆ ಸ್ವಾಗತ ಕಿಟ್ ವಿತರಣೆ ಹಾಗೂ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ, ಉದ್ಯಮ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಗಮನಾರ್ಹ ಸಾಧನೆ ಮಾಡುತ್ತಿದ್ದಾರೆ. ಈ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ಪ್ರತಿಯೊಬ್ಬರೂ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕೆ.ಆರ್. ಆಸ್ಪತ್ರೆಯಲ್ಲಿ ವಿಕಲಚೇತನರಿಗೆ ಅನುಕೂಲವಾಗುವಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಯುಡಿಐಡಿ (UDID) ಕಾರ್ಡ್ ಸೇರಿದಂತೆ ವಿವಿಧ ಸೇವೆಗಳನ್ನು ಸುಲಭವಾಗಿ ಪಡೆಯಲು ವಿಶೇಷ ವ್ಯವಸ್ಥೆ ಮಾಡಲಾಗಿದೆ. ವಿಕಲಚೇತನರು ಯಾವುದೇ ಸಂಕೋಚವಿಲ್ಲದೆ ಆಸ್ಪತ್ರೆಯ ಸೇವೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಸಮರ್ಥನಂ ಅಂಗವಿಕಲರ ಸಂಸ್ಥೆಯ ಮೈಸೂರು ವಿಭಾಗದ ಮುಖ್ಯಸ್ಥ ಶಿವರಾಜು ಮಾತನಾಡಿ, ಸಂಸ್ಥೆಯಲ್ಲಿ ಯುವತಿಯರಿಗೆ ಉಚಿತ ಕಂಪ್ಯೂಟರ್ ಶಿಕ್ಷಣ, ಇಂಗ್ಲಿಷ್ ಭಾಷಾ ತರಬೇತಿ, ವ್ಯಕ್ತಿತ್ವ ವಿಕಸನ, ಜೀವನ ಕೌಶಲ್ಯ ತರಬೇತಿ ಹಾಗೂ ಶೈಕ್ಷಣಿಕ ಪೂರಕ ಪರಿಕರಗಳನ್ನು ಸಂಪೂರ್ಣ ಉಚಿತವಾಗಿ ಒದಗಿಸಲಾಗುತ್ತಿದೆ. ಈ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಶ್ರದ್ಧೆಯಿಂದ ಬಳಸಿಕೊಂಡು ತಮ್ಮ ಬದುಕನ್ನು ಉತ್ತಮ ದಿಕ್ಕಿನಲ್ಲಿ ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ಸಂಸ್ಥೆಯ ಉದ್ಯೋಗಾಧಿಕಾರಿ ಆರ್. ಸುಬ್ರಮಣಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗಾವಕಾಶಗಳು ಸಾಕಷ್ಟಿದ್ದು, ವಿದ್ಯಾರ್ಥಿಗಳು ತಮ್ಮ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಂಡು ಲಭ್ಯವಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ದ್ವಿತೀಯ ಬ್ಯಾಚ್‌ನ ವಿದ್ಯಾರ್ಥಿಗಳಿಗೆ ಸ್ವಾಗತ ಕಿಟ್‌ಗಳನ್ನು ವಿತರಿಸಿ, ಅವರ ಶೈಕ್ಷಣಿಕ ಹಾಗೂ ವೃತ್ತಿಪರ ಪಯಣಕ್ಕೆ ಶುಭ ಹಾರೈಸಲಾಯಿತು. ಕಾರ್ಯಕ್ರಮದಲ್ಲಿ ವಿಜ್ಞಾನ ಸಂಯೋಜಕ ಮಹಾಂತೇಶ್, ತರಬೇತಿದಾರರಾದ ಸ್ಪರ್ಶ, ಎಸ್. ಲತಾ, ಪವನ್, ಲಕ್ಷ್ಮಿ ಹೇಮಲತಾ ಹಾಗೂ ಯುವ ರಂಗಕರ್ಮಿ ಶಶಿಕಾಂತ ಪಟೇಲ್ ಉಪಸ್ಥಿತರಿದ್ದರು.

admin
the authoradmin

Leave a Reply