LatestLife style

ದೊಡ್ಡಪತ್ರೆಯಲ್ಲಿ ಏನೇನು ಆರೋಗ್ಯಕಾರಿ ಗುಣಗಳಿವೆ ಗೊತ್ತಾ? ನಿಮ್ಮ ಮನೆಯಲ್ಲಿಯೂ ಈ ಗಿಡವಿರಲಿ!

ನಮ್ಮ ಆರೋಗ್ಯವನ್ನು ಸುತ್ತಮುತ್ತ ಇರುವ ಗಿಡಮೂಲಿಕೆಗಳಿಂದಲೇ ಪಡೆಯಬಹುದಾಗಿದೆ. ಹೀಗಾಗಿಯೇ ಹಿಂದಿನ ಕಾಲದವರು ಔಷಧೀಯ ಗುಣಗಳ ಗಿಡಮೂಲಿಕೆಗಳನ್ನು ಮನೆ ಸುತ್ತಮುತ್ತ ನೆಟ್ಟು ಅವುಗಳನ್ನು ಬಳಸಿಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳುತ್ತಿದ್ದರು. ಹೀಗೆ ಬಳಕೆಯಾಗುತ್ತಿದ್ದ ಗಿಡಮೂಲಿಕೆಯಲ್ಲಿ ದೊಡ್ಡಪತ್ರೆಯೂ ಒಂದಾಗಿದೆ.

ತಂತ್ರಜ್ಞಾನ ಮುಂದುವರೆದಂತೆ ಕಾಯಿಲೆಗಳಿಗೆ ಔಷಧಿಗಳನ್ನು ಕಂಡು ಹಿಡಿಯುತ್ತಿದ್ದಂತೆ ಕಾಯಿಲೆಗಳು ಹೆಚ್ಚು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ. ಹಿಂದೆ ಜ್ವರ, ಶೀತ ಸೇರಿದಂತೆ ಹಲವು ಕಾಯಿಲೆಗಳಿಗೆ ತಮ್ಮ ಮನೆಯ ಹಿತ್ತಲಿನಲ್ಲಿದ್ದ ಗಿಡವನ್ನೇ ಮದ್ದಾಗಿ ಬಳಸಿಕೊಳ್ಳುತ್ತಿದ್ದರು.  ತಮ್ಮ ಹಿತ್ತಲಿನಲ್ಲಿ ಹೂವಿನ ಗಿಡಗಳೊಂದಿಗೆ ಔಷಧೀಯ ಸಸ್ಯಗಳನ್ನು ಬೆಳೆಸಿಕೊಳ್ಳುತ್ತಿದ್ದರು. ಅವು ಅಲಂಕಾರ ಸಸ್ಯವಾಗಿ ಕಂಗೊಳಿಸುತ್ತಾ ಔಷಧಿಗೆ ಬಳಕೆಯಾಗುತ್ತಿತ್ತು. ಇಂತಹ ಔಷಧೀಯ ಸಸ್ಯಗಳಲ್ಲಿ ದೊಡ್ಡಪತ್ರೆಗೆ ಮಹತ್ವದ ಸ್ಥಾನವಿದೆ.

ಇದು ಅವತ್ತಿನ ಕಾಲದಲ್ಲಿ ಕಾಲಾರದಂತಹ ರೋಗವನ್ನೇ ಹತೋಟಿಗೆ ತರುವಂತಹ ಶಕ್ತಿಯನ್ನು ಹೊಂದಿತ್ತು ಎಂದರೆ ಅಚ್ಚರಿಯಾಗಬಹುದು. ಇವತ್ತಿಗೂ ದೊಡ್ಡಪಾತ್ರೆ ಹೆಚ್ಚಿನ ಮನೆಗಳ ಹಿತ್ತಲಿನಲ್ಲಿ ಕಂಡು ಬರುತ್ತದೆ. ಇದನ್ನು ಸಂಬಾರಬಳ್ಳಿ, ಸಾವಿರ ಸಂಬಾರ(ಅಜವಾನದೆಲೆ), ಕರ್ಪೂರವಳ್ಳಿ, ಚೆಂಪರವಳ್ಳಿ ಹೀಗೆ ಹಲವು ಹೆಸರುಗಳಿಂದ ಕರೆಯುವುದನ್ನು ನಾವು ಕಾಣಬಹುದು. ಇದು ನೆಲದ ಮೇಲೆ ಪೊದೆಯಾಗಿ ಬೆಳೆಯುತ್ತದೆ. ಎಲೆಗಳು ಹಸಿರಾಗಿ, ದಪ್ಪವಾಗಿರುತ್ತದೆ. ಅಷ್ಟೇ ಅಲ್ಲ ಎಲೆಗಳಲ್ಲಿ ನೀರಿನ ಅಂಶ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಎಲೆಗಳನ್ನು ಕೊಯ್ದು ಸ್ವಲ್ಪ ಬೆಂಕಿಯಲ್ಲಿ ಬಾಡಿಸಿ ಹಿಂಡಿದರೆ ನೀರು ಸಿಗುತ್ತದೆ. ಈ ನೀರಿನಲ್ಲಿ ಔಷಧಿಯ ಗುಣವಿದೆ.

ಸುವಾಸನೆ ಹೊಂದಿರುವ ದೊಡ್ಡಪತ್ರೆ ವಿಟಿಸ್ ಇಂಡಿಕಾ ಎಂಬ ಸಸ್ಯವರ್ಗಕ್ಕೆ ಸೇರಿದೆ. ಜ್ಯೇಷ್ಠದಿಂದ ಭಾದ್ರಪದದವರೆಗೆ ಎಲೆಗಳು ಹುಲುಸಾಗಿ ಬೆಳೆದಿರುತ್ತವೆ. ತೇವವಿರುವ ಮತ್ತು ಜವಳು ಮಣ್ಣಿನಲ್ಲಿ ಚೆನ್ನಾಗಿ ಬೆಳೆಯುತ್ತದೆ. ಮನೆಗಳಲ್ಲಿ ಹೂಕುಂಡಗಳಲ್ಲಿ ಇದನ್ನು ಬೆಳೆಸಬಹುದು. ಭಾರತದ ಮಲಬಾರ ತೀರ ಸೇರಿದಂತೆ ಕರ್ನಾಟಕದ ಹೆಚ್ಚಿನ ಕಡೆ ಇದು ಚೆನ್ನಾಗಿ ಬೆಳೆಯುತ್ತದೆ. ಉಷ್ಣವಲಯದ ಏಷಿಯಾ ಮತ್ತು ಆಫ್ರಿಕಾ ಖಂಡದಲ್ಲಿ ಸಾಧಾರಣವಾಗಿ ಇಪ್ಪತ್ತು ಪ್ರಭೇದಗಳಿವೆಯಂತೆ. ಭಾರತದಲ್ಲಿ ಸುಮಾರು ಹದಿಮೂರು ಬಗೆಗಳಿದ್ದು ಅವುಗಳಲ್ಲಿ ಕೆರೆನೋಷಸ್‌ವಾಲ್  (Caronosus wall)ಎಂಬ ವರ್ಗ ಹೆಚ್ಚು ಜನಪ್ರಿಯವಾಗಿದ್ದು, ಅದನ್ನೇ ಹೆಚ್ಚಾಗಿ ಬೆಳೆಸುತ್ತಾರೆ. ಪೊದೆಯಂತೆ ಕಾಂಡ ಹರಡಿ ಬೆಳೆಯುವುದರಿಂದ ಸಸ್ಯಾಭಿವೃದ್ಧಿಗೆ ಕಾಂಡವನ್ನು ಬಳಸಬಹುದಾಗಿದೆ.

ದೊಡ್ಡಪತ್ರೆ ಮನೆಯ ಹಿತ್ತಲಿನಲ್ಲಿ ನೆಟ್ಟು ಬೆಳೆಸುವುದರಿಂದ ಏನು ಉಪಯೋಗ ಎಂಬುವುದನ್ನು ನೋಡುವುದಾದರೆ, ಇದನ್ನು ಮಕ್ಕಳಲ್ಲಿ ಕಂಡು ಬರುವ ಉಬ್ಬಸ ಕಫಗಳ ನಿವಾರಣೆಗೆ ಬಳಸಬಹುದಂತೆ ಅದು ಹೇಗೆಂದರೆ? ಗಿಡದಿಂದ ಎಲೆಗಳನ್ನು ಕೊಯ್ದು ಚೆನ್ನಾಗಿ ತೊಳೆದು ಕಂಬೂದಿಯಲ್ಲಿ ಅಥವಾ ಬೆಂಕಿಯಲ್ಲಿ ಬಾಡಿಸಿಕೊಂಡು ಮಕ್ಕಳ ಎದೆಗೆ ಶಾಖ ಕೊಡಬೇಕು. ಎಲೆಗಳಿಂದ ಕಷಾಯ ಮಾಡಿ ಕುಡಿದರೆ ಕೆಮ್ಮು, ಉಬ್ಬಸ ಕಡಿಮೆಯಾಗುತ್ತದೆ. ಎಲೆಗಳಲ್ಲಿ ಕ್ಲೇಷ್ಮ ಬಿಡಿಸುವ ಗುಣವಿರುವುದರಿಂದ ಕಫ, ನೆಗಡಿಯಾಗಿ ಮೂಗು ಕಟ್ಟಿದರೆ ಎಲೆಗಳನ್ನು ಬಿಸಿ ಬೂದಿ ಇರುವ ಒಲೆಯಲ್ಲಿ  ಹಾಕಿಬಾಡಿಸಿ ಬಳಿಕ ಎಲೆಯನ್ನು ಹಿಂಡಿ ಅದರಿಂದ ಬರುವ ಮೂರ‍್ನಾಲ್ಕು ತೊಟ್ಟು ರಸವನ್ನು ಜೀರಿಗೆ ಕಷಾಯದಲ್ಲಿ ಹಾಕಿ ಕುಡಿದರೆ ಒಳ್ಳೆಯದಾಗುತ್ತದೆ. ಶೀತದಿಂದಾಗಿ ಮಕ್ಕಳಿಗೆ ಮಲಬದ್ಧತೆಯಾದರೆ ಎಲೆಗಳ ರಸದಲ್ಲಿ ಜೇನುತುಪ್ಪ ಬೆರೆಸಿ ಕುಡಿಸಿದರೆ ಮಲಬದ್ಧತೆ ನಿವಾರಣೆಯಾಗುತ್ತದೆ.

ಎಳ್ಳೆಣ್ಣೆಗೆ ದೊಡ್ಡಪತ್ರೆ ರಸವನ್ನು ಸೇರಿಸಿ ತಲೆಗೆ ಹಚ್ಚುವುದರಿಂದ ತಲೆ ತಂಪಾಗುತ್ತದೆ. ಅಷ್ಟೇ ಅಲ್ಲ ಕಣ್ಣುರಿಯೂ ಕಡಿಮೆಯಾಗುತ್ತದೆ. ಇನ್ನು ಬೇಸಿಗೆ ಸಮಯದಲ್ಲಿ ಬಿಗಿಯಾದ ಬಟ್ಟೆ ತೊಡುವುದರಿಂದ ಬೆವರಿನಿಂದ ತುರಿಕೆ, ಕಜ್ಜಿ ಕಾಣಿಸಿಕೊಳ್ಳುತ್ತದೆ. ಇದನ್ನು ತಡೆಯಲು ದೊಡ್ಡಪತ್ರೆ ಎಲೆ, ಅರಶಿನ ಪುಡಿ ಸೇರಿಸಿ ಸೇರಿಸಿ ಬೆಣ್ಣೆಯಲ್ಲಿ ಅರೆದು ಚೆನ್ನಾಗಿ ಕಲೆಸಿ ಮುಲಾಮು ಮಾಡಿಟ್ಟುಕೊಂಡು ದಿನಕ್ಕೆ ಒಂದೆರಡು ಬಾರಿ ಹಚ್ಚುತ್ತಾ ಬಂದರೆ ತುರಿಕೆ ಮಾಯವಾಗುತ್ತದೆ. ಇನ್ನು ಎಲೆಗಳ ರಸವನ್ನು ತೆಗೆದು ಗಂಟೆಗೊಮ್ಮೆ ಒಂದು ಚಮಚದಷ್ಟು ಕಾಯಿಸಿ ಆರಿಸಿದ ನೀರಿನಲ್ಲಿ ಹಾಕಿ ಕುಡಿದರೆ ಕಾಲಾರಾ ಹತೋಟಿಗೆ ಬರುವುದು. ಶೀತ, ಕೆಮ್ಮಿಗೆ ಕಬ್ಬಿನ ರಸದೊಂದಿಗೆ  ಎಲೆಗಳ ರಸವನ್ನು ಬೆರೆಸಿ ಕುಡಿಯಬಹುದಾಗಿದೆ.

ತೆಂಗಿನ ಹಾಲಿನೊಂದಿಗೆ ಡೊಡ್ಡಪತ್ರೆ ಬೇರಿಸ ರಸವನ್ನು ಬೆರೆಸಿ ಕುಡಿದರೆ ಅಲ್ಸರ್ ಗುಣವಾಗುತ್ತದೆ ಎನ್ನಲಾಗಿದೆ. ಇನ್ನು ಕುರುನಂತಹ ವೃಣಗಳಾದಾಗ ಬೇರನ್ನು ಜಜ್ಜಿ ಎಣ್ಣೆ ಮತ್ತು ತೆಂಗಿನ ಹಾಲಿನೊಂದಿಗೆ ಬೆರೆಸಿ ಹಚ್ಚಬೇಕು.  ಇನ್ನು ಎಲೆಗಳನ್ನು ಚಟ್ನಿ, ತಂಬುಳಿ ಮೊದಲಾದವುಗಳನ್ನು ಸೇವಿಸಿದರೆ ಉತ್ತಮ ಆರೋಗ್ಯ ಪಡೆಯಲು ಸಾಧ್ಯವಾಗುತ್ತದೆ. ಒಟ್ಟಿನಲ್ಲಿ ಆರೋಗ್ಯದ ಗಣಿಯಾಗಿರುವ ದೊಡ್ಡಪತ್ರೆಯನ್ನು ಮನೆಯ ಹಿತ್ತಲಿನಲ್ಲಿ ಬೆಳೆಯುವುದರಿಂದ ಹಲವು ರೀತಿಯ ಉಪಯೋಗ ಪಡೆಯಬಹುದು ಎಂಬುವುದರಲಿ ಎರಡು ಮಾತಿಲ್ಲ.

 

B.M.Lavakumar

admin
the authoradmin

Leave a Reply