ಮೈಸೂರು ದಸರಾದಲ್ಲಿ ಮನೆ, ಮನೆಗಳಲ್ಲಿ ಬೊಂಬೆಗಳ ಮೆರವಣಿಗೆ… ಬೊಂಬೆ ಪ್ರದರ್ಶನ ನಡೆದು ಬಂದಿದ್ದು ಹೇಗೆ?

ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿಬೆಟ್ಟದಲ್ಲಿ ಚಾಲನೆ ನೀಡಲಾಗಿದ್ದು, ನವರಾತ್ರಿಯ ಸಡಗರ ಆರಂಭವಾಗಿದೆ. ಇನ್ನೊಂದೆಡೆ ಇಲ್ಲಿನ ಮನೆ ಮನೆಗಳಲ್ಲಿ ಬೊಂಬೆಗಳ ದಿಬ್ಬಣವೂ ಹೊರಟಿದೆ. ಹೆಣ್ಣು ಮಕ್ಕಳು ಬೊಂಬೆಗಳನ್ನು ಕೂರಿಸಿ ಆರತಿ ಎತ್ತಿ ಸಂಭ್ರಮಿಸುತ್ತಿದ್ದಾರೆ. ಇದೀಗ ತಮ್ಮ ಮನೆಗಳಲ್ಲಿ ಪ್ರತಿಷ್ಠಾಪಿಸಿರುವ ಬೊಂಬೆಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುತ್ತಿರುವ ದೃಶ್ಯಗಳು ಸಾಮಾನ್ಯವಾಗಿವೆ.
ಪ್ರತಿವರ್ಷವೂ ದಸರಾದಲ್ಲಿ ಬೊಂಬೆ ಕೂರಿಸುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಸಾಮಾನ್ಯವಾಗಿ ಬೊಂಬೆ ಪ್ರದರ್ಶನ ಎಲ್ಲೆಡೆ ನಡೆಯುತ್ತದೆಯಾದರೂ ಮೈಸೂರು ದಸರಾದಲ್ಲಿ ಅದಕ್ಕೊಂದು ಗೌರವದ ಸ್ಥಾನ ನೀಡಲಾಗಿದೆ. ಇದಕ್ಕೆ ಕಾರಣ ಮೈಸೂರನ್ನು ಆಳಿದ ಮಹಾರಾಜರಾದ ರಾಜ ಒಡೆಯರ್. 1610ರಲ್ಲಿ ದಸರಾ ಆರಂಭಿಸಿ ರಾಜ ಒಡೆಯರ್ ಆ ನಂತರ ಅರಮನೆಯಲ್ಲಿ ಬೊಂಬೆಪ್ರದರ್ಶನ ಮಾಡುವ ಸಂಪ್ರದಾಯಕ್ಕೆ ನಾಂದಿ ಹಾಡಿದರು. ಅದು ಇವತ್ತಿಗೂ ಮುಂದುವರೆಯುತ್ತಾ ಬಂದಿದೆ.
ನವರಾತ್ರಿ ಸಂದರ್ಭದಲ್ಲಿ ಮಹಿಳೆಯರು ತಮ್ಮ ಮನೆಗಳಲ್ಲಿ ವಿವಿಧ ಬಣ್ಣದ, ನಮೂನೆಯ ಗೊಂಬೆಗಳನ್ನಿಟ್ಟು ಆರತಿ ಬೆಳಗುವ ಮೂಲಕ ಪೂಜೆ ಸಲ್ಲಿಸುತ್ತಾರೆ. ಪಾಡ್ಯದಿಂದ ಆರಂಭವಾಗಿ ಬಿದಿಗೆ, ತದಿಗೆ, ಚೌತಿ, ಪಂಚಮಿ, ಷಷ್ಠಿ, ಸಪ್ತಮಿ, ಅಷ್ಠಮಿ, ನವಮಿ ತನಕ ಒಂಬತ್ತು ದಿನಗಳ ಕಾಲ ನಡೆಯುತ್ತದೆ. ಇತರೆ ದಿನಗಳಲ್ಲಿ ಮನೆಯ ಶೋಕೇಶ್ನಲ್ಲಿರುವ ಗೊಂಬೆಗಳು ನವರಾತ್ರಿ ಬರುತ್ತಿದ್ದಂತೆಯೇ ದೇವರಕೋಣೆಯಲ್ಲಿ ಪೂಜ್ಯ ಸ್ಥಾನ ಪಡೆಯುತ್ತವೆ. ಕೆಲವರು ಮಣ್ಣು, ಗಾಜು, ಉಲ್ಲಾನ್, ಪ್ಲಾಸ್ಟಿಕ್, ಪಿಂಗಾಣಿ, ಇನ್ನಿತರೆ ವಸ್ತುಗಳಿಂದ ತಯಾರಿಸಿದ ಗೊಂಬೆಗಳನ್ನು ಮನೆಯಲ್ಲಿ ಕೂರಿಸಿದರೆ ಮತ್ತೆ ಕೆಲವರು ಮಣ್ಣಿನಿಂದಲೇ ಮಾಡಿದ ಗೊಂಬೆಗಳನ್ನು ಕೂರಿಸುತ್ತಾರೆ.
ಇದನ್ನೂ ಓದಿ: ಮೈಸೂರು ಅರಮನೆಯಲ್ಲಿ ತಯಾರಾದ ‘ಸಿಹಿ’ಪಾಕ ‘ಮೈಸೂರು’ ಪಾಕ ಆಗಿದ್ದೇಗೆ? ಇಲ್ಲಿದೆ ಕಥೆ
ಈ ಗೊಂಬೆಗಳು ಸಾಮಾನ್ಯವಾಗಿ ಪುರಾಣದ ಕಥೆಗಳನ್ನು, ನಾಡಿನ ಪರಂಪರೆಯನ್ನು ಸಾರುತ್ತಿರುತ್ತವೆ. ಈಶ್ವರ, ಗಣಪತಿ, ಲಕ್ಷ್ಮಿ, ಸರಸ್ವತಿ, ದುರ್ಗಿ ಮೊದಲಾದ ದೇವರ ಮೂರ್ತಿಗಳನ್ನೂ, ದುಷ್ಟ ಸಂಹಾರಕ್ಕೆ ಸಂಬಂಧಿಸಿದ ಕಥಾ ಹಿನ್ನಲೆಗಳನ್ನು ಹೊಂದಿರುವ ಗೊಂಬೆಗಳನ್ನು ಇಲ್ಲಿ ಪ್ರತಿಷ್ಠಾಪಿಸುವುದು ಕೂಡ ಒಂದು ಕಲೆಯೇ. ಇನ್ನು ಇತಿಹಾಸದ ಪುಟಗಳನ್ನು ತೆರೆದು ನೋಡಿದರೆ, ಹಿಂದಿನ ಕಾಲದಲ್ಲಿ ಮಕ್ಕಳಿಗೆ ಈಗಿನ ಕಾಲದಂತೆ ಮನೋರಂಜನೆಗೆ ಯಾವುದೇ ಆಧುನಿಕ ಆಟಿಕೆಗಳಿರಲಿಲ್ಲ. ಹಾಗಾಗಿ ಮಕ್ಕಳು ಬಾಲ್ಯದಿಂದಲೇ ಗೊಂಬೆಗಳೊಂದಿಗೆ ಆಡುತ್ತಾ ಬೆಳೆಯುತ್ತಿದ್ದರು
ಬಾಲ್ಯವಿವಾಹವೂ ನಡೆಯುತ್ತಿದ್ದ ಕಾಲವಾದುದರಿಂದ ಹೆತ್ತವರು ಮಗಳನ್ನು ಮದುವೆ ಮಾಡಿಕೊಡುವಾಗ ಆಟವಾಡುತ್ತಿದ್ದ ಗೊಂಬೆಗಳನ್ನು ಸಹ ಜೊತೆಯಲ್ಲಿಯೇ ನೀಡುತ್ತಿದ್ದರು. ಅಲ್ಲದೆ ವರ್ಷಕ್ಕೊಮ್ಮೆ ಈ ಗೊಂಬೆಗಳನ್ನು ಒಂದೆಡೆ ಪ್ರತಿಷ್ಠಾಪಿಸಿ ಅದಕ್ಕೆ ಆರತಿ ಬೆಳಗಿ ಪೂಜಿಸುವಂತೆ ಹೇಳುತ್ತಿದ್ದರೆಂದೂ ಅದರಂತೆ ಈ ಗೊಂಬೆ ಹಬ್ಬ ರೂಢಿಗೆ ಬಂದಿರಬಹುದೆಂದು ಅಭಿಪ್ರಾಯಪಡಲಾಗಿದೆ. ನವರಾತ್ರಿಯಲ್ಲಿ ಬೊಂಬೆ ಪ್ರದರ್ಶನ ಮಾಡುವುದು ಎಲ್ಲೆಡೆ ನಡೆದುಕೊಂಡು ಬರುತ್ತಿತ್ತಾದರೂ ಮೈಸೂರಿನಲ್ಲಿ ಅದಕ್ಕೊಂದು ಸ್ಥಾನಮಾನ ನೀಡಿದ್ದು ಮೈಸೂರು ಮಹಾರಾಜರಾಗಿದ್ದ ರಾಜಒಡೆಯರು.
ಇದನ್ನೂ ಓದಿ: ಮೈಸೂರಿನಲ್ಲಿ ಅಡ್ಡಾಡುವುದು ಪ್ರವಾಸಿಗರಿಗೆ ಇಷ್ಟ ಏಕೆ? ನೋಡಬಹುದಾದ ತಾಣಗಳು ಯಾವುವು?
ಅವರು ತಮ್ಮ ಆರಾಧನೆಯಲ್ಲಿ ಗೊಂಬೆಗೂ ಒಂದು ಮಹತ್ವದ ಸ್ಥಾನ ನೀಡಿ ನಾಡಹಬ್ಬ ನವರಾತ್ರಿಯಲ್ಲಿ ದಸರಾ ಮೆರವಣಿಗೆಯಂತೆಯೇ ಬೊಂಬೆಗೂ ವಿಶೇಷ ಸ್ಥಾನ ಕಲ್ಪಿಸಿದರು. ನವರಾತ್ರಿಯ ಒಂಬತ್ತು ದಿನವೂ ಅರಮನೆಯಲ್ಲಿ ವಿವಿಧ ಬೊಂಬೆಗಳನ್ನು ಸಾಲಾಂಕೃತವಾಗಿ ಜೋಡಿಸಿ, ಪೂಜಿಸಿ ಪ್ರದರ್ಶಿಸುವುದು ಅವರ ಆಡಳಿತಾವಧಿಯಿಂದ ಮುಂದುವರೆದು ಬಂತೆಂದು ಹೇಳಲಾಗಿದೆ. ಅವರ ಕಾಲದಲ್ಲಿ ಅರಮನೆಯಲ್ಲಿ ದರ್ಬಾರ್ ಹಾಲ್, ಚಿತ್ರಶಾಲೆ, ವಿವಾಹ ಮಂಟಪ, ಭೋಜನ ಶಾಲೆ, ಶಸ್ತ್ರಗಾರವಿರುವಂತೆ ಬೊಂಬೆಗಳ ಪ್ರದರ್ಶನಕ್ಕೂ ಒಂದು ಪ್ರತ್ಯೇಕ ಸ್ಥಳವನ್ನು ಮೀಸಲಿರಿಸಿದರು. ಅದೇ ’ತೊಟ್ಟಿಮನೆ.
ಈ ತೊಟ್ಟಿಮನೆಯಲ್ಲಿ ಗತಕಾಲದ ಕಲಾತ್ಮಕತೆಯನ್ನು ಸಾರುವ ದಂತ, ಶ್ರೀಗಂಧದ ಮರ ಸೇರಿದಂತೆ ಬೆಲೆಬಾಳುವ ಮರಗಳಿಂದ ಕೆತ್ತಿದ ಅಪೂರ್ವ ಬೊಂಬೆಗಳನ್ನು ಕಾಣಬಹುದು. ಕಲಾಪೋಷಕರಾಗಿದ್ದ ರಾಜಒಡೆಯರು ಕಲಾತ್ಮಕ ಬೊಂಬೆಗಳ ಕೆತ್ತನೆಯನ್ನೇ ತಮ್ಮ ಬದುಕಾಗಿಸಿಕೊಂಡ ಕಲಾವಿದರಿಗೆ ಪ್ರೋತ್ಸಾಹ ನೀಡುವ ಮೂಲಕ ಬದುಕಲು ಅವಕಾಶ ಮಾಡಿಕೊಟ್ಟರು. ಇವರ ಪ್ರೋತ್ಸಾಹದಿಂದ ಹಲವು ಕಲಾಕಾರರು ಬೆಳಕಿಗೆ ಬಂದರು ಎಂಬುವುದರಲ್ಲಿ ಎರಡು ಮಾತಿಲ್ಲ.
ಇದನ್ನೂ ಓದಿ: ಮೈಸೂರಲ್ಲಿ ಯದುವಂಶ ಉದಯವಾಗಿದ್ದು ಹೇಗೆ? ಮಹಾರಾಜರುಗಳ ಕುರಿತಂತೆ ಇತಿಹಾಸ ಹೇಳುವುದೇನು?
ಮೈಸೂರು ರಾಜಒಡೆಯರ ಪ್ರತೀಕವೆಂಬಂತೆ ಅವರಿಗೆ ಗೌರವ ಸೂಚಕವಾಗಿ ಪ್ರತಿ ಮನೆಮನೆಯ ಬೊಂಬೆಗಳ ಸಾಲಿನಲ್ಲಿ ರಾಜರಾಣಿ ಬೊಂಬೆ ಮೇಲ್ಪಂಕ್ತಿಯಲ್ಲಿ ಸ್ಥಾನಪಡೆದಿರುತ್ತವೆ. ಈ ಬೊಂಬೆಗಳನ್ನು ಪಟ್ಟದ ಬೊಂಬೆಗಳೆಂದು ಕರೆಯಲಾಗುತ್ತದೆ. ಉಳಿದಂತೆ ಅಂಬಾರಿ ಹೊತ್ತ ಆನೆ, ಪದಾತಿದಳ, ಕುದುರೆ, ಒಂಟೆಗಳ ಸಾಲು, ಮೈಸೂರು ಅರಮನೆ ಸೇರಿದಂತೆ ಹಲವು ಬೊಂಬೆಗಳು ಪ್ರದರ್ಶನದಲ್ಲಿ ಪ್ರಮುಖ ಸ್ಥಾನವನ್ನು ಪಡೆದಿರುವುದನ್ನು ನಾವು ಕಾಣಬಹುದಾಗಿದೆ. ಒಟ್ಟಾರೆ ಮೈಸೂರಿನ ಬೊಂಬೆಗಳಿಗೆ ತನ್ನದೇ ಆದ ಇತಿಹಾಸವಿದ್ದು ದಸರಾ ಸಂದರ್ಭದಲ್ಲಿ ಅವುಗಳ ಪ್ರಾಮುಖ್ಯತೆ ಬೆಳಕಿಗೆ ಬರುತ್ತದೆ.
(ಮೈಸೂರಿನ ಬೋಗಾದಿ ಮುಖ್ಯ ರಸ್ತೆಯಲ್ಲಿರುವ ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ ದಸರಾ ಹಬ್ಬದ ಪ್ರಯುಕ್ತ ಗೊಂಬೆಗಳ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಶಾಲಾ ಆಡಳಿತಾಧಿಕಾರಿ ಶ್ರೀಮತಿ ಕಾಂತಿ ನಾಯಕ್, ಶ್ರೀಮತಿ ವಿಜಯಲಕ್ಷ್ಮಿ ಹಾಗೂ ಸಹ ಶಿಕ್ಷಕಿಯರು ಉಪಸ್ಥಿತರಿದ್ದರು.)
B M Lavakumar