ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಕಾಂಗ್ರೆಸ್ ನ್ನು ಬಲವರ್ಧನೆಗೊಳಿಸಲು ಶಾಸಕ ಮಂತರ್ ಗೌಡ ಸಲಹೆ
ಕಾಂಗ್ರೆಸ್ ಕಾರ್ಯಕರ್ತರ,ಮುಖಂಡರ ಸಮಾಲೋಚನಾ ಸಭೆ

ಕುಶಾಲನಗರ (ರಘುಹೆಬ್ಬಾಲೆ): ರಾಜ್ಯ ಸರ್ಕಾರದ ಜನಪರ ಯೋಜನೆಗಳ ಕುರಿತು ಜನಜಾಗೃತಿ ಮೂಡಿಸುವ ಮೂಲಕ ಮುಂದಿನ ಜಿಲ್ಲಾ,ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗೆ ಪಕ್ಷವನ್ನು ಬಲವರ್ಧನೆಗೊಳಿಸಲು ಕಾಂಗ್ರೆಸ್ ಕಾರ್ಯಕರ್ತರು ಶ್ರಮಿಸಬೇಕು ಎಂದು ಶಾಸಕ ಡಾ.ಮಂತರ್ ಗೌಡ ಸಲಹೆ ನೀಡಿದರು.

ಇಲ್ಲಿನ ಎಸ್.ಎಲ್.ಎನ್. ಸಭಾಂಗಣದಲ್ಲಿ ಏರ್ಪಡಿಸಿದ್ದ ಮಡಿಕೇರಿ ಕ್ಷೇತ್ರದ ಕಾಂಗ್ರೆಸ್ ಮುಖಂಡರ ಹಾಗೂ ಕಾರ್ಯಕರ್ತರ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪ್ರತಿಯೊಬ್ಬ ಕಾರ್ಯಕರ್ತರು ಪಕ್ಷ ಸಂಘಟನೆಗೆ ಒತ್ತು ನೀಡಬೇಕು. ನಾನು ಕ್ಷೇತ್ರದ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಲು ಸದಾವಕಾಶ ನೀಡಿದ್ದಿರಿ.ನಿಮ್ಮ ಬೆಂಬಲ,ಸಹಕಾರ ನಿರಂತರ ಅಗತ್ಯವಿದೆ ಎಂದರು.

ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೂಲ ಉದ್ದೇಶವಾಗಿದೆ. ಕಾಂಗ್ರೆಸ್ ಪಕ್ಷದಿಂದ ರಾಜಕೀಯ ಆರಂಭಿಸಿದ್ದು, ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗುವ ಪ್ರಶ್ನೆ ಇಲ್ಲ ಎಂದು ಇತ್ತೀಚಿಗೆ ಕೇಳಿ ಬರುತ್ತಿರುವ ಊಹಾಪೋಹಗಳಿಗೆ ತೆರೆ ಎಳೆದರು. ಮಡಿಕೇರಿ ಕ್ಷೇತ್ರದ ಹಲವು ಯೋಜನೆಗಳನ್ನು ಮುಂದಿನ ಕೆಲವೇ ದಿನಗಳಲ್ಲಿ ಪೂರ್ಣಗೊಳಿಸುವ ಚಿಂತನೆ ಹೊಂದಿದ್ದು ಸರ್ಕಾರ ಎಲ್ಲಾ ರೀತಿಯಲ್ಲಿಯೂ ಸಹಕಾರ ನೀಡುತ್ತಿದೆ ಎಂದರು.
ಕಾಂಗ್ರೆಸ್ ಪಕ್ಷದ ವಕ್ತಾರ ಎಂ.ಲಕ್ಷ್ಮಣ್ ಮಾತನಾಡಿ, ಮಡಿಕೇರಿ ಕ್ಷೇತ್ರದಲ್ಲಿ ಯಾವುದೇ ಕಾರ್ಯಕರ್ತರನ್ನು ಕಡೆಗಣಿಸುವಂತಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಕಾರ್ಯಕರ್ತರೊಂದಿಗೆ ಶ್ರಮಿಸುವುದಾಗಿ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯ ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪುವ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು.ರಾಜ್ಯ ಸರ್ಕಾರದ ಸಮಗ್ರ ಯೋಜನೆಗಳ ಬಗ್ಗೆ ಮಾಹಿತಿಗಳನ್ನು ಒದಗಿಸುವಂತಾಗಬೇಕು, ಮನರೇಗಾ ಹೋರಾಟ ಅತ್ಯಂತ ಪರಿಣಾಮಕಾರಿಯಾಗಿ ನಡೆಯಬೇಕಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಬೇಕು. ಎಲ್ಲಾ ಹಂತಗಳಲ್ಲಿ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರ್ಯಕರ್ತರು ಪಣತೊಡುವಂತೆ ಹೇಳಿದರು.
ಜಿಲ್ಲಾ ಕಾಂಗ್ರೆಸ್ ವಕ್ತಾರ ಟಿ.ಪಿ.ರಮೇಶ್, ವಕೀಲ ಎಚ್.ಎಸ್.ಚಂದ್ರಮೌಳಿ,ವಿವಿಧ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿ ಪಿ ಶಶಿಧರ್, ಟಿ ಜಿ ಸತೀಶ್, ಎಚ್.ಎ.ಹಂಸ ಅವರು ತಮ್ಮ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆಯ ಬಗ್ಗೆ ಸಮಗ್ರ ಮಾಹಿತಿ ಒದಗಿಸಿದರು.

ಈ ಸಂದರ್ಭ ಮಾಜಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜಿ.ಆರ್.ಪುಷ್ಪಲತಾ, ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಶರೀಫ್,ಮುಖಂಡರಾದ ಶಾಂತಳ್ಳಿ ಲೋಕೇಶ್, ಕೆ.ಪಿ.ಚಂದ್ರಕಲಾ,ಕೆ ಎ ಯಾಕೋಬ್, ವಿಜೆಯೇಂದ್ರ, ಮಂಜುನಾಥ ಗುಂಡುರಾವ್, ಕೆ.ಕೆ. ಮಂಜುನಾಥ್ ಕುಮಾರ್, ನಾಪಂಡ ಮುತ್ತಪ್ಪ, ಬಿ ಡಿ ಅಣ್ಣಯ್ಯ, ಜಿಲ್ಲಾ,ತಾಲೂಕು ಘಟಕಗಳ ಪದಾಧಿಕಾರಿಗಳು, ಹಿಂದುಳಿದ ಅಲ್ಪಸಂಖ್ಯಾತ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು ಪಾಲ್ಗೊಂಡಿದ್ದರು.ಸರ್ಕಾರದಿಂದ ನಾಮಕರಣ ಗೊಂಡಿರುವ ಮುಖಂಡರ ಅವದಿ ಮುಗಿದ ನಂತರ ಆ ಸ್ಥಾನಗಳಿಗೆ ಮುಂದಿನ ಅವಧಿಗೆ ಅರ್ಹರಿಗೆ ಕಾರ್ಯಕರ್ತರಿಗೆ ನೀಡುವಂತೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ನಂತರ ಯುಗಾದಿ ಮತ್ತು ರಂಜಾನ್ ಹಬ್ಬ ಅಂಗವಾಗಿ ಪಕ್ಷದ ಕಾರ್ಯಕರ್ತರಿಗೆ ವಿವಿಧ ಭಕ್ಷ್ಯ ಭೋಜನಗಳನ್ನು ಏರ್ಪಡಿಸಲಾಗಿತ್ತು.







