ಕೆ.ಆರ್.ನಗರ(ಜಿಟೆಕ್ ಶಂಕರ್): ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವ್ಯಾಸಂಗದ ನಂತರ ಮುಂದೇನು ಮಾಡಬೇಕು ಎಂಬ ಬಗ್ಗೆ ತರಬೇತಿ ಮತ್ತು ಮಾರ್ಗದರ್ಶನ ನೀಡಲು ಹುಣಸೂರಿನಲ್ಲಿ ದೇವರಾಜ್ ಒಡೆಯರ್ ಜನ ಸೇವಾ ಕೇಂದ್ರದ ವತಿಯಿಂದ ಒಂದು ದಿನದ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಸಮಾಜ ಸೇವಕರು ಆದ ಐಎಎಸ್ ತರಬೇತುದಾರ ದೇವರಾಜ್ ಒಡೆಯರ್ ತಿಳಿಸಿದರು.
ಕೆ.ಆರ್.ನಗರ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಏ.10 ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಹುಣಸೂರಿನ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಾಗಾರವನ್ನು ಹುಣಸೂರು ಉಪ- ವಿಭಾಗಾಧಿಕಾರಿ ಕುಮಾರಿ ಕಾವ್ಯರಾಣಿ ಉದ್ಘಾಟಿಸಲಿದ್ದು ಅಕ್ಕ ಐಎಎಸ್ ಅಕಾಡೆಮಿಯ ಡಾ.ಶಿವಕುಮಾರ್, ಮೈಸೂರಿನ ಮಹಾರಾಣಿ ಮಹಿಳಾ ವಿಜ್ಙಾನ ಕಾಲೇಜಿನ ಡಾ.ಲಕ್ಷ್ಮಣ್ ಬಿ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ ಎಂದರು.
ಮುಖ್ಯ ಅತಿಥಿಗಳಾಗಿ ಬಿಇಒ ಎಸ್.ಪಿ.ಮಹದೇವ್, ಹುಣಸೂರು ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಮಂಜು ಬಾಗವಹಿಸಲಿದ್ದಾರೆಂದು ಅವರು ತಿಳಿಸಿದರು. ಕಾರ್ಯಾಗಾರದಲ್ಲಿ ಭಾಗವಹಿಸುವವರಿಗೆ ನೋಂದಣಿ ಕಡ್ಡಾಯವಾಗಿದ್ದು, ಪ್ರವೇಶ ಉಚಿತವಾಗಿರುತ್ತದೆ ಎಂದು ಮಾಹಿತಿ ನೀಡಿದ ದೇವರಾಜ ಒಡೆಯರ್ ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ಕಾರ್ಯಾಗಾರದ ಪ್ರಯೋಜನ ಪಡೆದುಕೊಳ್ಳಬೇಕೆಂದು ಹೇಳಿದ್ದಾರೆ.








