News

ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ  ಅನುಪಾಲನ ವರದಿ ಸೇರಿದಂತೆ ವಿವಿಧ ಚರ್ಚೆ

ಕುಶಾಲನಗರ(ರಘುಹೆಬ್ಬಾಲೆ): ಇಲ್ಲಿನ ಪುರಸಭೆ ಸಭಾಂಗಣದಲ್ಲಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯು ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್ ಅಧ್ಯಕ್ಷತೆಯಲ್ಲಿ ನಡೆದು, ಮೊದಲಿಗೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಅನುಪಾಲನ ವರದಿ ಕುರಿತು ಚರ್ಚೆ ನಡೆಸಲಾಯಿತು.

ತಾಲ್ಲೂಕಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿಭಾಗಕ್ಕೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ರೂ.40.34 ಕೋಟಿ ಅನುದಾನ ಬಿಡುಗಡೆಯಾಗಿದೆ ಎಂದ ಶಶಿಧರ್, ಬಿಡುಗಡೆಯಾಗಿರುವ ಅನುದಾನದಲ್ಲಿ ವಿವಿಧೆಡೆ ಟ್ರಾನ್ಸ್‌ಫಾರ್ಮರ್ ಅಳವಡಿಕೆ, ಹಳೆಯ ಹಾಗೂ ಹಾನಿಯಾಗಿರುವ ವಿದ್ಯುತ್ ಕಂಬಗಳ ಬದಲಾವಣೆ, ವಿದ್ಯುತ್ ಕೇಬಲ್ ಲೈನ್ ಅಳವಡಿಕೆ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದರು.

ಚೆಸ್ಕಾಂ ವತಿಯಿಂದ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಯ ಸಮಗ್ರ ಮಾಹಿತಿಯನ್ನು ಮುಂದಿನ ಸಭೆಯಲ್ಲಿ ನೀಡುವಂತೆ ಚೆಸ್ಕಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಲ್ಲಿನ ಸರ್ಕಾರಿ ಪಿಎಂಶ್ರೀ ಸರ್ಕಾರಿ ಶಾಲೆ ಮುಂಭಾಗದಲ್ಲಿರುವ ವಿದ್ಯುತ್ ಕಂಬಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಹೇಳಿದರು. ಹೆಬ್ಬಾಲೆ ಗ್ರಾಮದಲ್ಲಿ ನೂತನ ಚೆಸ್ಕಾಂ ಸಹಾಯಕ ಎಂಜಿನಿಯರ್ ಶಾಖಾ ಕಚೇರಿ ಆರಂಭಿಸಲು ಸರ್ಕಾರಕ್ಕೆ ಇಲಾಖೆ ವತಿಯಿಂದ ಪ್ರಸ್ತಾಪ ವಿಚಾರ ಏನಾಯಿತು ಎಂದು  ಸಹಾಯಕ ಎಂಜಿನಿಯರ್ ನೀತಾ ಅವರನ್ನು ಶಶಿಧರ್ ಪ್ರಶ್ನಿಸಿದರು. ಈಗಾಗಲೇ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ಕ್ರಮ ಕೈಗೊಳ್ಳಲಾಗಿದೆ.ಕಡತವು ಕಾರ್ಯಪಾಲಕ ಎಂಜಿನಿಯರ್ ಕಚೇರಿಯಲ್ಲಿದ್ದು, ಸಧ್ಯದಲ್ಲಿಯೇ ಸರ್ಕಾರ ಕಳುಹಿಸಿಕೊಡಲಾಗುತ್ತದೆ ಎಂದರು.

ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಎಲ್.ಕೆ.ಜಿ ಹಾಗೂ ಯು.ಕೆ.ಜಿ ಆರಂಭಿಸುವುದು ಬೇಡ.ಏಕೆಂದರೆ ಈಗಾಗಲೇ ಸರ್ಕಾರಿ ಶಾಲೆಯಲ್ಲೂ ಎಲ್.ಕೆ.ಜಿ ಹಾಗೂ ಯು.ಕೆ.ಜಿ ಆರಂಭಗೊಂಡಿದೆ.ಆದ್ದರಿಂದ ಯಾವುದೇ ಗೊಂದಲ ಹಾಗೂ ಮಕ್ಕಳ ಕೊರತೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಶ್ರೀದೇವಿಗೆ ನಿರ್ದೇಶನ ನೀಡಿದರು. ಕೂಡ್ಲೂರು ಕೈಗಾರಿಕಾ ಬಡಾವಣೆಯಲ್ಲಿ ಸಿಮೆಂಟ್ ಕಾರ್ಖಾನೆ ಬಳಿ ಕಾರ್ಯನಿರ್ವಹಿಸುತ್ತಿರುವ ಇಲಾಖೆಯ ಆಹಾರ ಸಂಸ್ಕರಣಾ ಘಟಕವನ್ನು ಕೂಡಲೇ ಬೇರೆಡೆಗೆ ಸ್ಥಳಾಂತರ ಮಾಡಬೇಕು ಎಂದು ಸೂಚನೆ ನೀಡಿದರು. ಈಗಾಗಲೇ ಘಟಕವನ್ನು ಬೇರೆಡೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಶ್ರೀದೇವಿ ಉತ್ತರಿಸಿದರು.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಧ್ಯಾಹ್ನ ಸುಂದರನಗರದ ವರೆಗೆ ಸಾರಿಗೆ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಶಶಿಧರ್ ಹೇಳಿದರು. ಮಡಿಕೇರಿ ಡಿಪೋ ವ್ಯವಸ್ಥಾಪಕ ಈರ್ಸಾಪ್ಪ ಅವರು ಇಲ್ಲಿನ ಬಸ್ ನಿಲ್ದಾಣ ನಿಯಂತ್ರಣಾಧಿಕಾರಿ ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ ಮುಂದಿನ ವಾರದಿಂದಲೇ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದರು‌.ಇಲ್ಲಿನ ಬಸ್ ನಿಲ್ದಾಣವನ್ನು ಹೈಟೆಕ್ ನಿಲ್ದಾಣವಾಗಿ ಅಭಿವೃದ್ಧಿ ಪಡಿಸಲು ಚಿಂತನೆ ನಡೆಸಲಾಗಿದೆ. ಬಸ್ ನಿಲ್ದಾಣದಲ್ಲಿ ಪಾರ್ಕಿಂಗ್, ಮಾಲ್ ನೊಂದಿಗೆ ವಿವಿಧ ಸೌಲಭ್ಯಗಳನ್ನು ಹೊಂದಿರುವ ನಿಲ್ದಾಣವಾಗಿ ಅಭಿವೃದ್ಧಿ ಪಡಿಸಲು ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲಾಗುತ್ತದೆ. ಜೊತೆಗೆ ವಿಭಾಗಾಧಿಕಾರಿ ಕಚೇರಿ ತೆರಯಲು ಒತ್ತಾಯಿಸಲಾಗುತ್ತದೆ ಎಂದರು.

ಸರ್ಕಾರ ಗೃಹಲಕ್ಷ್ಮಿ ಯೋಜನೆಯಡಿ ಗೃಹಿಣಿರಿಗೆ ಬಿಡುಗಡೆಯಾಗುವ ರೂ.2 ಸಾವಿರ ಹಣವನ್ನು ಯಾವುದೇ ಕಾರಣಕ್ಕೂ ಬ್ಯಾಂಕಿನವರು ಸಾಲಕ್ಕೆ ಜಮಾ ಮಾಡಿಕೊಳ್ಳದಂತೆ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಶಶಿಧರ್ ಹೇಳಿದರು.

ಯುವನಿಧಿ ಫಲಾನುಭವಿಗಳ ಬಗ್ಗೆ ಸರಿಯಾದ ಮಾಹಿತಿ ನೀಡದ ಉದ್ಯೋಗ ವಿನಿಮಯ ಕಚೇರಿ ಅಧಿಕಾರಿ  ಮಂಜುನಾಥ್ ಅವರನ್ನು ಶಶಿಧರ್ ತರಾಟೆಗೆ ತೆಗೆದುಕೊಂಡರು.ಹರಕೆ ಉತ್ತರ ನೀಡಬೇಡಿ, ದಾಖಲೆ ಸಮೇತ ಉತ್ತರ ನೀಡಿ ಎಂದು ಸೂಚಿಸಿದರು. 75 ವಯೋಮಾನದ ಪಡಿತರ ಫಲಾನುಭವಿಗಳಿಗೆ ಮನೆ ಬಾಗಿಲಿಗೆ ಆಹಾರ ಧಾನ್ಯ ವಿತರಿಸುವ ಕುರಿತು ಜಾಗೃತಿ ಮೂಡಿಸುವಂತೆ ಆಹಾರ ನಿರೀಕ್ಷಕಿ ಸ್ವಾತಿ ಅವರಿಗೆ ಸೂಚನೆ ನೀಡಿದರು.

ಈ ಸಂದರ್ಭ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ಶಶಿಭೀಮಯ್ಯ,ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಪರಮೇಶ್ ಕುಮಾರ್, ಸಮಿತಿ ಸದಸ್ಯರಾದ ಬಿ.ಸಿ.ಮಲ್ಲಿಕಾರ್ಜುನ, ಅಬ್ದುಲ್ ರಜಾಕ್, ಜೆ.ಫಿಲೋಮಿನಾ, ಎಚ್.ಎನ್.ರಾಜಶೇಖರ್, ಎಸ್.ಎ.ಶ್ರೀನಿವಾಸ, ಶ್ರೀನಿವಾಸ್ ಕುಮಾರ್, ರಫಿಕ್ ಖಾನ್ , ಕಿಶೋರ್ ಹಾಗೂ ವಿವಿಧ ಇಲಾಖಾಧಿಕಾರಿಗಳು ಪಾಲ್ಗೊಂಡಿದ್ದರು.

admin
the authoradmin

ನಿಮ್ಮದೊಂದು ಉತ್ತರ

Translate to any language you want