ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಸಿ ಜೆ ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ… ಐಟಿ ದಾಳಿಗೆ ಹೆದರಿದ್ರಾ?

ಬೆಂಗಳೂರು: ಭಾರತ ಮತ್ತು ದುಬೈನಲ್ಲಿ ಉದ್ಯಮ ಸ್ಥಾಪಿಸಿ ಯಶಸ್ವಿ ಉದ್ಯಮಿ ಎಂಬ ಖ್ಯಾತಿಗೆ ಪಾತ್ರರಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ ಜೆ ರಾಯ್ ಅವರು ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಅವರ ಸಂಸ್ಥೆ ಮೇಲೆ ಪದೇ ಪದೇ ಐಟಿ ದಾಳಿ ನಡೆಸಲಾಗುತ್ತಿತ್ತು. ಇದಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆಯಾದರೂ ನಿಖರ ಕಾರಣಗಳು ಇನ್ನಷ್ಟೇ ಗೊತ್ತಾಗಬೇಕಾಗಿದೆ.
ಬೆಂಗಳೂರಿನ ಲಾಂಗ್ ಪೋರ್ಡ್ ರಸ್ತೆಯಲ್ಲಿರುವ ಕಚೇರಿಯ ಚೇಂಬರ್ ನಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶುಕ್ರವಾರವೂ ಅವರ ಸಂಸ್ಥೆ ಮೇಲೆ ಐಟಿ ದಾಳಿ ನಡೆದಿತ್ತು ಎಂದು ಹೇಳಲಾಗಿತ್ತು. ಇದರಿಂದ ಅವರು ಮಾನಸಿಕವಾಗಿ ಬೇಸತ್ತಿದ್ದರು ಎನ್ನಲಾಗಿದೆ.

ಕಳೆದ ಎರಡು ದಶಕಗಳಿಂದ ಬೆಂಗಳೂರು, ಕೇರಳ ಮತ್ತು ದುಬೈನಲ್ಲಿ ಕಾನ್ಫಿಡೆಂಟ್ ಗ್ರೂಪ್ ಎಂಬ ರಿಯಲ್ ಎಸ್ಟೇಟ್ ಸ್ಥಾಪಿಸಿ ಕೋಟ್ಯಂತರ ವ್ಯವಹಾರಗಳನ್ನು ನಡೆಸುತ್ತಿದ್ದರು. ಇವರ ಸಂಸ್ಥೆಯನ್ನು ಯಶಸ್ವಿಯಾಗಿ ನಡೆಸಿಕೊಂಡು ಹೋಗುತ್ತಿದ್ದರು.ಒಂದು ಕಂಪನಿಯಾಗಿ ಮೆಚ್ಚುಗೆ ಕಾರಣವಾಗಿತ್ತು. ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಒಂದೊಳ್ಳೆಯ ಬ್ರಾಂಡ್ ಸೃಷ್ಟಿ ಮಾಡಿದ್ದ ಸಿ ಜೆ ರಾಯ್ ಇದೀಗ ಆತ್ಮಹತ್ಯೆ ಮಾಡಿಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಐಟಿ ಅಧಿಕಾರಿಗಳು ಕಚೇರಿಯಲ್ಲಿ ತಪಾಸಣೆ ನಡೆಸುತ್ತಿದ್ದಾಗಲೇ ಇತ್ತ ಚೇಂಬರ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಅನುಮಾನವನ್ನು ಹುಟ್ಟು ಹಾಕಿದ್ದು, ಪೊಲೀಸರ ತನಿಖೆ ಬಳಿಕ ನೈಜಾಂಶ ಬೆಳಕಿಗೆ ಬರಬೇಕಾಗಿದೆ.







