ಮೈಸೂರು: ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಕಡ್ಡಾಯವಾಗಿ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಶಾಲಾ ಕಾಲೇಜುಗಳಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಆಚರಿಸುವಂತೆ ಆದೇಶ ಹೊರಡಿಸಲು ಕರ್ನಾಟಕ ಹಿತರಕ್ಷಣಾ ಒಕ್ಕೂಟದ ಅಧ್ಯಕ್ಷ ಚಂದ್ರು ಮಂಡ್ಯ ಒತ್ತಾಯಿಸಿದ್ದಾರೆ
ನಾಡಪ್ರಭು ಕೆಂಪೇಗೌಡರು ಬೆಂಗಳೂರಿನ ನಿರ್ಮಾತೃಗಳಾಗಿದ್ದು, ಅವರ ದೂರದೃಷ್ಟಿ, ಆಡಳಿತ ಕೌಶಲ್ಯ ಮತ್ತು ಸಮಾಜಮುಖಿ ಚಿಂತನೆಗಳು ಇಂದಿಗೂ ಜನರಿಗೆ ಮಾದರಿಯಾಗಿವೆ. ಕರ್ನಾಟಕದ ಇತಿಹಾಸ ಹಾಗೂ ಸಂಸ್ಕೃತಿಗೆ ಅವರು ನೀಡಿರುವ ಕೊಡುಗೆ ಅಪಾರವಾಗಿದೆ.
ಆದಾಗ್ಯೂ, ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಕೆಲವು ಕಡೆಗಳಲ್ಲಿ ಮಾತ್ರ ಆಚರಿಸಲಾಗುತ್ತಿದ್ದು, ರಾಜ್ಯದಾದ್ಯಂತ ಸಮಗ್ರವಾಗಿ ಮತ್ತು ವ್ಯವಸ್ಥಿತವಾಗಿ ಆಚರಿಸುವ ಅಗತ್ಯವಿದೆ. ಆದ್ದರಿಂದ, ಅವರ ಜೀವನ, ಸಾಧನೆಗಳು ಮತ್ತು ಆದರ್ಶಗಳ ಕುರಿತು ಜನರಲ್ಲಿ ಹೆಚ್ಚಿನ ಅರಿವು ಮೂಡಿಸಲು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳಲ್ಲಿ ಶಿಕ್ಷಣ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಸಾರ್ವಜನಿಕ ಸಂಸ್ಥೆಗಳಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಕಡ್ಡಾಯವಾಗಿ ಆಚರಿಸುವಂತೆ ಸರ್ಕಾರವು ಆದೇಶ ಹೊರಡಿಸಬೇಕು
ಜಯಂತಿಯ ಅಂಗವಾಗಿ ಕೆಂಪೇಗೌಡರ ಬಗ್ಗೆ ಉಪನ್ಯಾಸಗಳು, ವಿಚಾರ ಸಂಕಿರಣಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಅವರ ಜೀವನ ಸಾಧನೆಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲು ಕ್ರಮ ಕೈಗೊಳ್ಳಬೇಕು. ಇದರಿಂದ ಯುವ ಪೀಳಿಗೆಗೆ ಇತಿಹಾಸದ ಮಹತ್ವದ ಅರಿವು ಮೂಡಿ, ಸಮಾಜ ಸೇವೆ ಮತ್ತು ಉತ್ತಮ ಆಡಳಿತದ ಮೌಲ್ಯಗಳನ್ನು ಅಳವಡಿಸಿಕೊಳ್ಳಲು ಪ್ರೇರಣೆ ದೊರೆಯುತ್ತದೆ.

ಆದ್ದರಿಂದ, ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಡ್ಡಾಯವಾಗಿ ಆಚರಿಸುವ ಕುರಿತು ಸೂಕ್ತ ಆದೇಶ ಹೊರಡಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸರ್ಕಾರವನ್ನು ಕರ್ನಾಟಕ ಹಿತರಕ್ಷಣಾ ಒಕ್ಕೂಟದ ಅಧ್ಯಕ್ಷ ಚಂದ್ರು ಮಂಡ್ಯ ಆಗ್ರಹಿಸಿದ್ದಾರೆ.








