ಕೆ.ಆರ್.ನಗರ(ಜಿಟೆಕ್ ಶಂಕರ್): ಪಟ್ಟಣದ ಠಾಣೆಗೆ ಕಾಯಕಲ್ಪ ನೀಡಿ ನಾಗರೀಕರಿಗೆ ಅಗತ್ಯ ರಕ್ಷಣೆ ನೀಡುವುದರ ಜತೆಗೆ ಕಾನೂನುಬಾಹಿರ ಚಟುವಟಿಕೆಗಳನ್ನು ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಬೋರಲಿಂಗಯ್ಯ ಹೇಳಿದರು.
ಪಟ್ಟಣದ ಆರಕ್ಷಕ ಠಾಣೆಗೆ ಭೇಟಿ ನೀಡಿ ಕಡತ ಪರಿಶೀಲನೆ ನಡೆಸಿ ಪೊಲೀಸರ ಸಭೆ ನಡೆಸಿದ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಇಲ್ಲಿ ಗಾಂಜಾ ಮಾರಾಟ ಸೇರಿದಂತೆ ಇತರ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ವ್ಯಾಪಕವಾಗಿ ದೂರುಗಳು ಕೇಳಿ ಬರುತ್ತಿದ್ದು, ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದರು.

ಪಟ್ಟಣ ಸೇರಿದಂತೆ ಠಾಣೆಯ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ ಕಳ್ಳತನ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂದು ಸುದ್ಧಿಗಾರರು ಅವರ ಗಮನಕ್ಕೆ ತಂದಾಗ ಇದಕ್ಕೆ ಉತ್ತರಿಸಿದ ಪೊಲೀಸ್ ಮಹಾನಿರ್ದೇಶಕರು ಇಂತಹ ನಿಯಮಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗುತ್ತದೆ ಎಂದು ತಿಳಿಸಿದರು.
ದಿನದಿಂದ ದಿನಕ್ಕೆ ಜನಸಂಖ್ಯೆ ಹೆಚ್ಚಾಗುತ್ತಿದ್ದು, ಇದರೊಂದಿಗೆ ಕಾನೂನುಬಾಹಿರ ಚಟುವಟಿಕೆಗಳ ಸಂಖ್ಯೆಯೂ ಹೆಚ್ಚುತ್ತಿರುವುದರಿಂದ ಕೆ.ಆರ್.ನಗರ ಪಟ್ಟಣಕ್ಕೆ ಪ್ರತ್ಯೇಕ ಆರಕ್ಷಕ ಠಾಣೆ ಆರಂಭಿಸಿ ಜನರಿಗೆ ಅಗತ್ಯ ರಕ್ಷಣೆ ನೀಡಲು ಕ್ರಮ ಕೈಗೊಂಡು ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಸಾರ್ವಜನಿಕ ಸ್ಥಳಗಳಲ್ಲಿ ಪುಂಡರ ಹಾವಳಿ ಹೆಚ್ಚಾಗಿದ್ದು, ಇದರೊಟ್ಟಿಗೆ ಇಸ್ಪೀಟು ದಂಧೆಯ ಬಗ್ಗೆ ನಮಗೆ ಖಚಿತ ಮಾಹಿತಿಯ ಮೂಲಕ ದೂರುಗಳು ಬಂದಿದ್ದು, ಇವುಗಳನ್ನು ನಿಗ್ರಹಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಉಪ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಠಾಣೆಯ ಆರಕ್ಷಕ ನಿರೀಕ್ಷರಿಗೆ ಸೂಚನೆ ನೀಡಿದ್ದೇನೆ ಎಂದರು

ಮನೆ ಮನೆಗೆ ಪೊಲೀಸ್ ಭೇಟಿ ನೀಡಿ ನಾಗರೀಕರಲ್ಲಿ ಭದ್ರತೆಯ ಬಗ್ಗೆ ಅಭಯ ಮೂಡಿಸುವ ಕೆಲಸ ಆಗುತ್ತಿಲ್ಲವೆಂಬ ದೂರುಗಳಿದ್ದು, ಈ ಬಗ್ಗೆಯೂ ಕ್ರಮ ವಹಿಸಲಾಗುತ್ತದೆ ಎಂದ ಅವರು ಅಕ್ರಮ ಚಟುವಟಿಕೆಗಳ ಬಗ್ಗೆ ನಾಗರೀಕರು ನಿರ್ಭಯದಿಂದ ದೂರು ಮತ್ತು ಮಾಹಿತಿ ನೀಡಬೇಕೆಂದು ಮನವಿ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಮಲ್ಲಿಕ್ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ ಟಿ.ಬಿ.ರಾಜಣ್ಣ, ಆರಕ್ಷಕ ನಿರೀಕ್ಷಕ ಎಸ್.ಶಿವಪ್ರಕಾಶ್, ಆರಕ್ಷಕ ಉಪನಿರೀಕ್ಷಕ ಆರ್.ಸ್ವಾಮಿಗೌಡ, ಆರಕ್ಷಕ ಸಹಾಯಕ ನಿರೀಕ್ಷಕ ಶ್ರೀನಿವಾಸ್, ಮುಖ್ಯ ಪೇದೆಗಳಾದ ಪರಶುರಾಮೇಗೌಡ, ಮಧುಕುಮಾರ್ ಹಾಜರಿದ್ದರು.








