ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಕೌಶಲ್ಯ ಆಧಾರಿತ ಶಿಕ್ಷಣ ಅಗತ್ಯ : ಡಾ.ನಂಜುಂಡಸ್ವಾಮಿ.

ಕುಶಾಲನಗರ (ಆರ್ ಹೆಚ್) : ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಯುತ, ನೈತಿಕ ಹಾಗೂ ಕೌಶಲ್ಯ ಆಧಾರಿತ ಶಿಕ್ಷಣ ತುಂಬ ಅಗತ್ಯವಾಗಿದೆ ಎಂದು ಪಿರಿಯಾಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ನಂಜುಂಡಸ್ವಾಮಿ ಹೇಳಿದರು.
ಪಟ್ಟಣದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜು ವತಿಯಿಂದ ಇಲ್ಲಿನ ರೈತ ಭವನದಲ್ಲಿ ಆಯೋಜಿಸಿದ್ದ ಸ್ವಾಗತ ಕಾರ್ಯಕ್ರಮ, ಪ್ರತಿಭಾ ಪುರಸ್ಕಾರ, ಶೈಕ್ಷಣಿಕ, ಕ್ರೀಡೆ ಹಾಗೂ ಎನ್ಎಸ್ಎಸ್ ಚಟುವಟಿಕೆಗಳ ಆರೋಹಣ- 26 ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಇವತ್ತಿನ ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಹಣದ ಸಂಸ್ಕತಿಗೆ ಒಳಗಾಗಬೇಡಿ, ಓದುವ ಸಂಸ್ಕತಿಗೆ ಒಳಗಾದರೆ ಮಾತ್ರ ತಮ್ಮ ಭವಿಷ್ಯ ರೂಪುಗೊಳ್ಳಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ಕೇವಲ ಅಂಕಗಳಿಸಲು ಓದಿದರೆ ಸಾಲದು,ಇದರೊಂದಿಗೆ ತಮ್ಮ ಸಾಮಾನ್ಯ ಜ್ಞಾನವನ್ನು ಕೂಡ ಬೆಳೆಸಿಕೊಳ್ಳಬೇಕು.ಉದ್ಯೋಗದ ಸಂದರ್ಶನಕ್ಕೆ ಹೋದಾಗ ಅವರು ಅಂಕಗಳನ್ನು ಮಾತ್ರ ಪರಿಗಣಿಸುವುದಿಲ್ಲ,ನಿಮ್ಮಲ್ಲಿರುವ ಕೌಶಲವನ್ನು ಪರಿಗಣಿಸುತ್ತಾರೆ ಎಂದರು.ಶಿಕ್ಷಣವನ್ನು ಸುಲಭವಾಗಿ ಸಂಪಾದಿಸಬಹುದು. ಇದರ ಮೂಲಕ ತಮ್ಮ ನಿರ್ದಿಷ್ಟ ಗುರಿಯನ್ನು ತಲುಪಿ ಜೀವನದಲ್ಲಿ ಯಶಸ್ಸುಗಳಿಸಬೇಕು ಎಂದರು.

ಸಂಚಾರಿ ಪೊಲೀಸ್ ಠಾಣಾ ಪಿಎಸ್ಐ ಗಣೇಶ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಕಾಲೇಜು ಜೀವನವನ್ನು ಸದುಪಯೋಗ ಮಾಡಿಕೊಳ್ಳಬೇಕು.ಚನ್ನಾಗಿ ಓದಿ ತಮ್ಮ ಗುರಿಯನ್ನು ಸಾಧಿಸಬೇಕು.ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ದಾಸರಾಗಿ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ.ಮೊಬೈಲ್ ಬಳಕೆಯನ್ನು ಅಗತ್ಯಕ್ಕೆ ಅನುಗುಣವಾಗಿ ಉಪಯೋಗಿಸಬೇಕು. ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಮ್ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಅಫೀಮು, ಗಾಂಜಾ ಸೇವನೆ ಯಂತಹ ದುಶ್ಚಟಗಳಿಗೆ ಯುವ ಜನಾಂಗ ಬಲಿಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ತಮ್ಮ
ಪೋಟೋ ಗಳನ್ನು ಪೇಸ್ ಬುಕ್, ಇನ್ಸ್ಟಾಗ್ರಾಂ ನಂತಹ ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಪೋಟೋಗಳನ್ನು ಆಪ್ ಲೋಡ್ ಮಾಡಬೇಡಿ ಎಂದು ಸಲಹೆ ನೀಡಿದ ಅವರು ನಿಮ್ಮ ಪೋಟೋ ಗಳನ್ನು ದುರುಪಯೋಗ ಮಾಡುವ ಸಾಧ್ಯಗಳು ಹೆಚ್ಚಾಗಿವೆ ಈ ಬಗ್ಗೆ ವಿದ್ಯಾರ್ಥಿಗಳು ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ಡೈವಿಂಗ್ ಲೈಸೆನ್ಸ್ ಸಿಗುವವರೆಗೆ ಅಂದರೆ ಹದಿನೆಂಟು ವರ್ಷ ತುಂಬುವವರೆಗೆ ವಾಹನ ಚಾಲನೆ ಮಾಡಬೇಡಿ.ಸಂಚಾರಿ ನಿಯಮಗಳನ್ನು ಉಲ್ಲಂಘನೆ ಮಾಡಬೇಡಿ.
ಇದರಿಂದ ಉಂಟಾದ ಅನೇಕ ಅನಾಹುತಗಳನ್ನು ಉದಾಹರಣೆಯಾಗಿ ತಿಳಿಸಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು.ವಿದ್ಯಾರ್ಥಿಗಳಿಗೆ ಎಸ್ಎಸ್ಎಲ್ಸಿ ಜೀವನದ ಮೊದಲ ಮೆಟ್ಟಿಲು ಆದರೆ ಪಿಯುಸಿ ಜೀವನಕ್ಕೆ ತಿರುವು ನೀಡುತ್ತದೆ.ಆದ್ದರಿಂದ ಕಾಲೇಜು ಶಿಕ್ಷಣ ನಿರ್ಲಕ್ಷ್ಯ ಮಾಡದೆ ಉಪನ್ಯಾಸಕ ಬೋಧನೆ, ಪೋಷಕರ ಮಾರ್ಗದರ್ಶನದಿಂದ ಉತ್ತಮ ಬದುಕು ಕಂಡುಕೊಳ್ಳಬೇಕು ಎಂದು ಹೇಳಿದರು.

ಕೆಬಿ ಕಾಲೇಜು ಪ್ರಾಂಶುಪಾಲ ಡಾ.ನಾಗೇಂದ್ರಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿ,ಹೊಸದಾಗಿ ಕಾಲೇಜಿಗೆ ಸೇರ್ಪಡೆ ವಿದ್ಯಾರ್ಥಿಗಳನ್ನು ಸ್ವಾಗತಿಸಿ, ಅವರಿಗೆ ಕಾಲೇಜು ಶಿಕ್ಷಣ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.ಕಾಲೇಜು ವಿದ್ಯಾರ್ಥಿಗಳು ಪಠ್ಯದಲ್ಲಿ ಮಾತ್ರವಲ್ಲದೆ ಪಠ್ಯೇತರ ಚಟುವಟಿಕೆಗಳಲ್ಲೂ ಛಾವು ಮೂಡಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭ ಗೌತಮ್ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಬಿ.ರಾಮಕೃಷ್ಣ,ಕನ್ನಡ ಭಾರತಿ ಪದವಿ ಕಾಲೇಜು ಪ್ರಾಂಶುಪಾಲ ರುದ್ರಪ್ಪ ಉಪಸ್ಥಿತರಿದ್ದರು.ಇದೇ ಸಂದರ್ಭ ದ್ವಿತೀಯ ಪಿಯುಸಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಹಾಗೂ ಕ್ರೀಡಾ ಚಟುವಟಿಕೆಯಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಉಪನ್ಯಾಸಕಿ ಸೌಮ್ಯ ಸ್ವಾಗತಿಸಿದರು.ವಿದ್ಯಾರ್ಥಿಗಳು ಪ್ರಾರ್ಥಿಸಿದರು. ನಂತರ ವಿದ್ಯಾರ್ಥಿಗಳು ಪ್ರದರ್ಶಿಸಿದ ಸಾಂಸ್ಕೃತಿಕ ಕಾರ್ಯಕ್ರಮ ನೆರೆದಿದ್ದ ಪ್ರೇಕ್ಷಕರ ಮನ ರಂಜಿಸಿತು.







