LatestMysore

ಪಿರಿಯಾಪಟ್ಟಣಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ… ಶಿಸ್ತುಬದ್ಧ ಕಾರ್ಯನಿರ್ವಹಣೆಗೆ ಅಧಿಕಾರಿಗಳಿಗೆ ಸೂಚನೆ

ಪಿರಿಯಾಪಟ್ಟಣ(ರವಿಚಂದ್ರ ಬೂದಿತಿಟ್ಟು): ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಗುದ್ದಲಿ ಪೂಜೆ ನೆರವೇರಿಸಲು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಏ.21 ರಂದು ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮದ ಯಶಸ್ವಿ ಆಯೋಜನೆಗಾಗಿ  ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಉಪವಿಭಾಗಾಧಿಕಾರಿ ಕಾವ್ಯ ರಾಣಿ ರವರ  ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.

ಮುಖ್ಯಮಂತ್ರಿಗಳ ತಾತ್ಕಾಲಿಕ ಪ್ರವಾಸ ಕಾರ್ಯಕ್ರಮದ ಸಂದರ್ಭದಲ್ಲಿ ಎಲ್ಲಾ ಇಲಾಖೆಯ ಅಧಿಕಾರಿಗಳು ಅವರಿಗೆ ನೀಡಿರುವ ಜವಾಬ್ದಾರಿಯನ್ನು ಶಿಸ್ತುಬದ್ಧವಾಗಿ ನಿರ್ವಹಿಸಬೇಕು ಎಂದು ಎಲ್ಲಾ ಇಲಾಖೆಯ ಮುಖ್ಯಸ್ಥರಿಗೆ ಕೆಲವು  ಮಾರ್ಗಸೂಚಿಗಳನ್ನು ನೀಡಿದರಲ್ಲದೆ, ಶಂಕುಸ್ಥಾಪನೆ ನೆರವೇರಿಸಲಿರುವ ಎಲ್ಲಾ ಅಭಿವೃದ್ಧಿ ಕಾಮಗಾರಿಗಳ ತಾಂತ್ರಿಕ ಹಾಗೂ ಆಡಳಿತಾತ್ಮಕ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಲು ಸಂಬಂಧಿಸಿದ ಇಲಾಖಾ ಎಂಜಿನಿಯರ್‌ಗಳಿಗೆ ಸೂಚಿಸಿದರು

ಮುಖ್ಯಮಂತ್ರಿಗಳ ಭೇಟಿಯ ವೇಳೆ ಯಾವುದೇ ಲೋಪವಾಗದಂತೆ ಶಿಷ್ಟಾಚಾರ (Protocol) ಪಾಲಿಸಲು ಮತ್ತು ಪೊಲೀಸ್ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯು ಸಮನ್ವಯದೊಂದಿಗೆ ವೇದಿಕೆ ಸಿದ್ಧತೆ, ವಾಹನ ನಿಲುಗಡೆ ಮತ್ತು ಭದ್ರತಾ ವ್ಯವಸ್ಥೆಗಳ ಬಗ್ಗೆ ನಿಗಾ ವಹಿಸಲು ನಿರ್ದೇಶಿಸಲಾಯಿತು. ತಾಲ್ಲೂಕು ಪಂಚಾಯಿತಿ, ಪುರಸಭೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗೆ ಜಂಟಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಸಭೆಯಲ್ಲಿ ಹೇಳಿದರು.

ಮುಖ್ಯಮಂತ್ರಿಗಳ ಭೇಟಿಯು ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಮತ್ತು ಕಾರ್ಯಕ್ರಮವು ಶಿಸ್ತುಬದ್ಧವಾಗಿ ನಡೆಯುವಂತೆ ಎಲ್ಲಾ ಇಲಾಖೆಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕೆಂದು ಉಪವಿಭಾಗಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಪೂರ್ವಭಾವಿ ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ  ಸುನೀಲ್ ಕುಮಾರ್, ಉಪ ತಹಸಿಲ್ದಾರ್ ಶಕೀಲಾ ಬಾನು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕೃಷ್ಣೇಗೌಡ,  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ವೀಣಾ, ಪುರಸಭೆ ಮುಖ್ಯಧಿಕಾರಿ ಮಧು, ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಪ್ರಸನ್ನ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಚಂದ್ರಶೇಖರ್, ಪೊಲೀಸ್ ವೃತ್ತ ನಿರೀಕ್ಷಕ  ಗೋವಿಂದರಾಜ್, ಸಹಾಯಕ ಕಾರ್ಯನಿರ್ವಹಣಾ ಎಂಜಿನಿಯರ್ ಗುರು ಬಸವರಾಜ ಸ್ವಾಮಿ ಅಭಿಯಂತರರಾದ ಮಲ್ಲಿಕಾರ್ಜುನ, ಕೃಷ್ಣ ಮೂರ್ತಿ, ಗೋಕುಲ್, ಬಸವರಾಜ್ ಆರಾಧ್ಯ, ರಕ್ಷಿತ್, ದಿನೇಶ್, ಲವ, ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

admin
the authoradmin

Leave a Reply

Translate to any language you want