ಸಾಲಿಗ್ರಾಮ(ಸಂಘಟನೆ ಮಂಜುನಾಥ್): ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಕಾರ್ಯಕ್ರಮವಾದ ಪಂಚ ಗ್ಯಾರಂಟಿ ಯೋಜನೆಗಳಿಂದ ನಾಡಿನ ಜನತೆಗೆ ಹೆಚ್ಚಿನ ಅನುಕೂಲವಾಗಿದೆ ಎಂದು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಉದಯಶಂಕರ್ ಹೇಳಿದರು.
ತಾಲೂಕಿನ ದೇವಿತಂದ್ರೆ ಗ್ರಾಮದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ವತಿಯಿಂದ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಅರಿವು ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಈ ಯೋಜನೆಗಳಿಂದ ಪ್ರತಿ ಕುಟುಂಬಕ್ಕೂ ವರ್ಷಕ್ಕೆ ಸುಮಾರು 48ಸಾವಿರ ರೂಗಳ ನೆರವು ದೊರೆಯುತ್ತಿದೆ. ಈ ಯೋಜನೆಗಳಿಂದ ಯಾರೂ ಕೂಡ ವಂಚಿತರಾಗಬಾರದು ಹಾಗೂ ಯಾವುದಾದರೂ ಸಮಸ್ಯೆಗಳಿದ್ದರೆ ಅದನ್ನು ಪರಿಹರಿಸುವುದರ ಜೊತೆಗೆ ಅವುಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ತಾಲೂಕಿನ ವಿವಿಧ ಭಾಗಗಳಲ್ಲಿ ಮಾಡಲಾಗುತ್ತಿದೆ ಇದನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾಂಗ್ರೆಸ್ ಪಕ್ಷದ ನೇತೃತ್ವದ ರಾಜ್ಯ ಸರ್ಕಾರವನ್ನು ಹಾಗೂ ಕಾಂಗ್ರೆಸ್ ಪಕ್ಷದ ನಾಯಕರುಗಳನ್ನು ವಿರೋಧ ಪಕ್ಷದವರು ಟೀಕೆ ಮಾಡುತ್ತಾರೆ. ಅವರುಗಳು ಟೀಕೆಯನ್ನು ಮಾಡಿಕೊಂಡು ಹಾಗೆ ಮುಂದುವರೆಯಲಿ ನಮ್ಮ ಸರ್ಕಾರ ಹಾಗೂ ನಮ್ಮ ನಾಯಕರುಗಳು ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಮುಂದುವರಿಯುತ್ತಾರೆ ಟೀಕೆ ಮಾಡುವವರಿಗೆ ಜನತೆಯೇ ತಕ್ಕ ಉತ್ತರ ನೀಡುತ್ತಾರೆ ಎಂದರು.

ತಾ.ಪಂ. ಇಓ ರವಿಕುಮಾರ್ ಮಾತನಾಡಿ ಪಂಚ ಗ್ಯಾರಂಟಿ ಯೋಜನೆಗಳು ಸಮಾಜಕ್ಕೆ, ದುರ್ಬಲ ವರ್ಗಕ್ಕೆ ವಿಶೇಷವಾಗಿ ಮಹಿಳಾ ವರ್ಗಕ್ಕೆ ಹೆಚ್ಚಿನ ಶಕ್ತಿಯನ್ನು ತಂದುಕೊಟ್ಟಿರುತ್ತದೆ ಎಂದರು. ಗ್ರಾಮ ಪಂಚಾಯತಿ ಮಟ್ಟದಲ್ಲಿ ಅರಿವು ಶಿಬಿರಗಳನ್ನು ಮಾಡುವುದರಿಂದ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸುತ್ತಾರೆ, ಅವರ ಸಮಸ್ಯೆಗಳನ್ನು ಹೇಳಿಕೊಳ್ಳಲು ಹಾಗೂ ಅವುಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಅನುಕೂಲವಾಗುತ್ತದೆ ಎಂಬ ಕಾರಣದಿಂದ ಇಂತಹ ಅರಿವು ಶಿಭಿರಗಳನ್ನು ಮಾಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ರಾಣಿ, ಲೋಕೇಶ್, ಮೂರ್ತಿ, ವಾಷಿಂ, ರವಿ, ಮಹಾಲಿಂಗಪ್ಪ, ಕಾಂತರಾಜು, ಮೋಹನ್, ಉಷಾ, ಅನಿಲ್, ಮಹದೇವ್, ಸಿಡಿಪಿಓ ಅಣ್ಣಯ್ಯ, ಆಹಾರ ಇಲಾಖೆ ಶಿರಸ್ತೆದಾರ್ ಮಂಜುನಾಥ್, ಚೆಸ್ಕಾಂ ಎಎಇ ಮಧುಸೂದನ್, ಸಾರಿಗೆ ಇಲಾಖೆ ಅಧಿಕಾರಿ ಗುರು, ಪಿಡಿಓ ವಿ.ಎನ್.ಪೂರ್ಣಿಮಾ ಸೇರಿದಂತೆ ಹಲವರು ಇದ್ದರು.








